spot_img
Wednesday, April 29, 2026
spot_img

ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಘಟಕದ ಹೆಡ್ ಕಾನ್ಸ್‌ಸ್ಟೇಬಲ್ ಶಂಕರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ


ಉಡುಪಿ: ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಘಟಕದ ಹೆಡ್ ಕಾನ್ಸ್‌ಸ್ಟೇಬಲ್ ಶಂಕರ್ 2023ನೇ ಸಾಲಿನ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಶಂಕರ್ ಅವರು ಸುಬ್ಬಯ್ಯ ಪೂಜಾರಿ ಮತ್ತು ಶ್ರೀಮತಿ ಮುಕಾಂಬು ಇವರ ಜ್ಯೇಷ್ಠ ಪುತ್ರನಾಗಿದ್ದು, ಮೂಲತಃ ಉಡುಪಿ ಜಿಲ್ಲೆ ಬೈಂದೂರು ತಾಲೂಕು ಬಿಜೂರು ಗ್ರಾಮದ ಕಾಡಿನತಾರಿನವರು. 1999ನೇ ಇಸವಿಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು, ಉಡುಪಿ ಜಿಲ್ಲೆಯಲ್ಲಿ ಬುನಾದಿ ತರಬೇತಿ ಪಡೆದು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಘಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು.

ತದನಂತರ ಇಲಾಖೆ ವತಿಯಿಂದ ಪಿ.ಡಿ.ಎಂ.ಎಸ್ .ವಾಹನ ಚಾಲನಾ ತರಬೇತಿಯನ್ನು ಬೆಂಗಳೂರಿನಲ್ಲಿ ಪಡೆದು ಪ್ರಸ್ತುತ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಾಲ್ಯದಿಂದಲೇ ಕ್ರೀಡಾಪಟು ಆಗಿರುವ ಇವರು ಬಿಡುವಿಲ್ಲದ ಕರ್ತವ್ಯದ ನಡುವೆಯೂ ಕ್ರೀಡಾಭ್ಯಾಸ ಮಾಡಿಕೊಂಡು ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳಷ್ಟು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆದಿರುತ್ತಾರೆ. ಬೇರೆ ಬೇರೆ ಇಲಾಖೆ ,ಸಂಸ್ಥೆಗಳು ಆಯೋಜಿಸಿರುವ ಸ್ಪರ್ಧೆಗಳಲ್ಲಿಯೂ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ.

24×7 ಗರುಡ ವಾಹನದಲ್ಲಿ 2005 ರಿಂದ 2007 ರವರೆಗೆ ಕರ್ತವ್ಯ ನಿರ್ವಹಿಸಿದ್ದು, ನೂರಾರು ಜನರ ಪ್ರಾಣರಕ್ಷಣೆ ಮತ್ತು ಶವಗಳನ್ನು ಸಾಗಿಸುವಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ.

ಜಿಲ್ಲಾ ಪೊಲೀಸ್ ವಿಶೇಷ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ನಕ್ಸಲ್ ಕೂಂಬಿಂಗನಲ್ಲೂ ಭಾಗವಹಿಸಿದ್ದಾರೆ. ಪ್ರಸ್ತುತ ಡಿ.ಎ.ಆರ್. ಘಟಕದಲ್ಲಿ ಗಣ್ಯ ವ್ಯಕ್ತಿಗಳ ಬೆಂಗಾವಲು ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರು 2020ನೇ ಸಾಲಿನಲ್ಲಿ ನಿರ್ವಹಿಸಿದ ಉತ್ತಮ ಕರ್ತವ್ಯಕ್ಕಾಗಿ ಕರ್ನಾಟಕ ರಾಜ್ಯ ಸರಕಾರದಿಂದ ನೀಡಲಾದ ಮುಖ್ಯಮಂತ್ರಿಗಳ ಪದಕವನ್ನು ಪಡೆದಿದ್ದಾರೆ.

ಇವರು ಪತ್ನಿ ಶ್ರೀಮತಿ ಜ್ಯೋತಿ, ಪ್ರಾಥಮಿಕ ಶಾಲಾ ಶಿಕ್ಷಕಿ ಹಾಗೂ ಇಬ್ಬರು ಪುತ್ರರಾದ ಶೌರ್ಯ ಮತ್ತು ಕಶ್ಯಪ್ ಇವರೊಂದಿಗೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದಲ್ಲಿ ಸ್ವಗ್ರಹ “ಶಾರ್ವರಿ” ಇಲ್ಲಿ ಜೀವನ ಸಾಗಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!