spot_img
Friday, April 17, 2026
spot_img

ಪುತ್ತಿಗೆ ಸ್ವಾಮಿಗಳ ಸಮುದ್ರ ಉಲ್ಲಂಘನೆ ಪ್ರಕರಣ : ಜ್ಞಾನ ಸಂಪಾದನೆ ಮತ್ತು ಅದರ ಪ್ರಸಾರಕ್ಕೆ ವಿದೇಶಕ್ಕೆ ತೆರಳಿದರೆ, ಸಮುದ್ರ ದಾಟಿ ಹೋದರೆ ತಪ್ಪೇನು? : ಹೈಕೋರ್ಟ್‌ 

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಉಡುಪಿಯ ಅಷ್ಟ ಮಠಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ನ್ನು ಹೈಕೋರ್ಟ್ ವಜಾಗೊಳಿಸಿ ಜ್ಞಾನ ಸಂಪಾದನೆ ಮತ್ತು ಅದರ ಪ್ರಸಾರಕ್ಕೆ ವಿದೇಶಕ್ಕೆ ತೆರಳಿದರೆ ಹಾಗೂ ಸಮುದ್ರ ದಾಟಿ ಹೋದರೆ ತಪ್ಪೇನು” ಎಂದು ಹೈಕೋರ್ಟ್‌ ಸ್ಪರ್ಶಿಸಿದೆ.

ಮಧ್ವಾಚಾರ್ಯರ ಅನುಯಾಯಿ, ಸೋದೆ ಮಠ ಹಾಗೂ ಕೃಷ್ಣಾಪುರ ಮಠದ ಭಕ್ತ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಕುಳಾಯಿ, ಹೊಸಬೆಟ್ಟು ಗ್ರಾಮದ ಮೂಲ ನಿವಾಸಿ ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಗುರುರಾಜ್ ಜೀವನ್ ರಾವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ನ್ಯಾಯ ಪೀಠದ ವಿಚಾರಣೆ ನಡೆಸಿತ್ತು.

ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ಹೈಕೋರ್ಟ್, ಉಡುಪಿ ಅಷ್ಟಮಠದ ಪರ್ಯಾಯ ಮಹೋತ್ಸವ ಆಯೋಜನೆಗೆ ಮಾರ್ಗಸೂಚಿ ಅಥವಾ ಬೈಲಾ ರೂಪಿಸಲು ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಿದೆ.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸಾಗರಾದಾಚೆ ಪ್ರಯಾಣ ಬೆಳೆಸಿದವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಬಾರದು ಎಂಬುದು ಅಷ್ಟಮಠಗಳ ಪರಂಪರೆ ಹಾಗೂ ಸಂಪ್ರದಾಯವಾಗಿದೆ. ಸಮುದ್ರೋಲ್ಲಂಘನೆ ಮಾಡಿದವರು ಶ್ರೀಕೃಷ್ಣನ ಮೂರ್ತಿಯ ಸ್ಪರ್ಶ ಮಾಡಲು ಮತ್ತು ಪೂಜೆ ಮಾಡಲು ಅರ್ಹರಲ್ಲ. ಆದ್ದರಿಂದ ಜನವರಿ 8ರಿಂದ 18ರವರೆಗೆ ನಡೆಯಲಿರುವ ಉಡುಪಿ ಅಷ್ಟಮಠದ ಪರ್ಯಾಯದಲ್ಲಿ ಪುತ್ತಿಗೆ ಮಠದ ಪೀಠಾಧಿಪತಿ ಸುಗಣೇಂದ್ರ ತೀರ್ಥರು ಪಾಲ್ಗೊಳ್ಳುವುದಕ್ಕೆ ನಿರ್ಬಂಧ ವಿಧಿಸಬೇಕು ಮತ್ತು ಅಷ್ಟಮಠದ ಪರ್ಯಾಯ ಆಯೋಜನೆಗೆ ಮಾರ್ಗಸೂಚಿ ಅಥವಾ ಬೈಲಾ ರೂಪಿಸಲು ಸಮಿತಿಯೊಂದನ್ನು ರಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಈ ಬಗ್ಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿಯವರು, ಇನ್ನೂ 18ನೇ ಶತಮಾನದ ಮಾತುಗಳನ್ನಾಡುತ್ತಿದ್ದೀರಿ. ನಾವಿಂದು 21ನೇ ಶತಮಾನದಲ್ಲಿದ್ದೇವೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜ್ಞಾನ ಸಂಪಾದನೆಗೆ ವಿದೇಶಕ್ಕೆ ಹೋಗಲಿಲ್ಲವೇ? ಸ್ವಾಮಿ ವಿವೇಕಾನಂದರು ವಿದೇಶದಲ್ಲಿ ಜ್ಞಾನದ ಪ್ರಸಾರ ಮಾಡಿದ ಪರಿ ನಮ್ಮಲ್ಲಿ ಹೆಮ್ಮೆ ತರಿಸುತ್ತಿಲ್ಲವೇ? ಸಾಮ್ರಾಟ್ ಅಶೋಕ್ ತನ್ನ ಮಕ್ಕಳಾದ ಮಹೇಂದ್ರ ಹಾಗೂ ಸಂಘಮಿತ್ರನನ್ನು ಬೌದ್ಧ ಧರ್ಮದ ಪ್ರಚಾರಕ್ಕೆ ಶ್ರೀಲಂಕಾ ದೇಶಕ್ಕೆ ಕಳಿಸಿಲ್ಲವೇ? ಶಂಕರಾಚಾರ್ಯರು ಸಾಗರ ದಾಟಿ ಇಡೀ ದೇಶ ಸುತ್ತಾಡಿದರು. ಸಂಪ್ರದಾಯ ಅಥವಾ ಪರಂಪರೆ ಇರಬಹುದು. ಆದರೆ, ತೆರೆದ ಮನಸ್ಸು ಮತ್ತು ಮುಕ್ತ ಆಲೋಚನೆಗಳೊಂದಿಗೆ ವಿದೇಶಕ್ಕೆ ಹೋಗಿ ಧಾರ್ಮಿಕ ಜ್ಞಾನ ಸಂಪಾದನೆ ಮಾಡುವುದು ಹಾಗೂ ಅದನ್ನು ಪ್ರಸಾರ ಮಾಡುವುದರಲ್ಲಿ ತಪ್ಪೇನಿದೆ. ಈ ವಿಚಾರದಲ್ಲಿ ನಿರ್ಬಂಧ ವಿಧಿಸುವುದಕ್ಕೆ ಅವಕಾಶ ಎಲ್ಲಿದೆ” ಎಂದು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿ. ಕೃಷ್ಣ ಎಸ್. ದೀಕ್ಷಿತ್ ಅವರು “ಧರ್ಮ-ಶಾಸ್ತ್ರದ ವಿಚಾರದಲ್ಲಿ ಹೀಗೆ ಮಾಡಬೇಕು, ಈ ರೀತಿ ನಡೆದುಕೊಳ್ಳಬೇಕು, ಅದನ್ನು ಮುಟ್ಟಬಾರದು, ಇದನ್ನು ಸೇವಿಸಬಾರದು ಎಂದು ನ್ಯಾಯಾಲಯ ಹೇಳಬೇಕು ಎಂಬುದು ಎಷ್ಟು ಸರಿ? ರಾಷ್ಟ್ರಕವಿ ಕುವೆಂಪು ಅವರು ‘ಓ ನನ್ನ ಚೇತನ….ಆಗು ನೀ ಅನಿಕೇತನ’ ಎಂದು ಹೇಳಿದ್ದಾರೆ. ನಿಕೇತನ ಎಂದರೆ ಮನೆ, ಅನಿಕೇತನ ಎಂದಾಗ ಮನೆಯಿಂದ ಆಚೆ ಬಂದು ನೋಡಬೇಕು ಎಂದರ್ಥ. ಹೀಗಿರುವಾಗ ಸ್ವಾಮೀಜಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದರು ಎಂದರೆ, ಈ ವಿಚಾರದಲ್ಲಿ ನ್ಯಾಯಾಲಯ ಏನು ಮಾಡಬೇಕು. ಈ ಗೊಂದಲ 2ನೇ ಬಾರಿ ಎದ್ದಿದೆ. ಯಾವುದಕ್ಕೂ ಒಂದು ಮಿತಿ ಇರುತ್ತದೆ. ಮುಕ್ತ ಮನಸ್ಸು ಹಾಗೂ ಮುಕ್ತ ಆಲೋಚನೆಗಳಿರಬೇಕು ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ.

ಏನಿದು ಪುತ್ತಿಗೆ ಮಠದ ಪ್ರಕರಣ?
ಪುತ್ತಿಗೆ ಮಠದ ಶ್ರೀ ಸುಗಣೇಂದ್ರತೀರ್ಥರು 1997ರಲ್ಲಿ ಅಮೆರಿಕಾಗೆ ಸಾಗರ ದಾಟಿ ಹೋಗಿದ್ದಾರೆ. ಸಾಗರ ದಾಟಿದವರು ಅಷ್ಟ ಮಠಗಳ ಪೀಠಾಧಿಪತಿಯಾಗುವುದಕ್ಕೆ ಅವಕಾಶವಿರುವುದಿಲ್ಲ.  ಶ್ರೀಕೃಷ್ಣನ ಮೂರ್ತಿ ಸ್ಪರ್ಶ ಮಾಡುವುದಕ್ಕೆ ಹಾಗೂ ಪೂಜೆ ಮಾಡುವುದಕ್ಕೆ ಅಂತವರಿಗೆ ಅವಕಾಶವಿರುವುದಿಲ್ಲ.

ಪರ್ಯಾಯ ಮಹೋತ್ಸವದಲ್ಲಿ ಭಾಗಿಯಾಗುವುದಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಪರ್ಯಾಯಯದಲ್ಲಿ ಪಾಲ್ಗೊಳ್ಳದಂತೆ ಅವರನ್ನು ತಡೆಯಬೇಕು. ಅಲ್ಲದೇ ಪರ್ಯಾಯದ ಆಯೋಜನೆಗೆ ಮಾರ್ಗಸೂಚಿ ಅಥವಾ ಬೈಲಾ ರೂಪಿಸಲು ಸಮಿತಿ ರಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!