Saturday, July 27, 2024

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ ಕೆ. ಜಯಪ್ರಕಾಶ್‌ ಹೆಗ್ಡೆ ನೇತೃತ್ವದ ಶಾಶ್ವತ ಹಿಂದುಳಿದ ಆಯೋಗ !

ಜನಪ್ರತಿನಿಧಿ (ಬೆಂಗಳೂರು) : ರಾಜಕೀಯ ವಲಯದಲ್ಲಿ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಇಂದು (ಗುರುವಾರ) ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ಸಿದ್ದಪಡಿಸಿದ ವರದಿಯನ್ನು ಅಧಿಕೃತವಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಮಧ್ಯಾಹ್ನ ವಿಧಾನಸೌಧಕ್ಕೆ ಎರಡು ಬಾಕ್ಸ್ ವರದಿ ಪ್ರತಿಗಳ ಜೊತೆಗೆ ಆಗಮಿಸಿದ ಕೆ ಜಯಪ್ರಕಾಶ್‌ ಹೆಗ್ಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ತೆರಳಿ ವರದಿಯ ಪ್ರತಿಯನ್ನು ಹಸ್ತಾಂತರ ಮಾಡಿದರು. ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ.

ಹಿಂದುಳಿದ ವರ್ಗದ ಆಯೋಗದಿಂದ ವರದಿ ಸ್ವೀಕಾರ ಮಾಡಿದ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಕ್ಯಾಬಿನೆಟ್​​ನಲ್ಲಿ ಜಾತಿಗಣತಿ ವರದಿ ಚರ್ಚೆ ಮಾಡುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳತ್ತೇವೆ ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಮಾತನಾಡಿ, ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ವರದಿ ಸಿದ್ಧಪಡಿಸಿದ್ದೇವೆ​. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಜಾತಿಗಣತಿ ವರದಿಯನ್ನು ಓದದೇ ಅವೈಜ್ಞಾನಿಕ ಎಂದು ಹೇಗೆ ಹೇಳುತ್ತೀರಿ. ನಾವು ಸಿದ್ಧಪಡಿಸಿದ ಜಾತಿ ಗಣತಿಯ ವರದಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಜಾತಿ ಗಣತಿ ವರದಿಯಲ್ಲಿ ಏನೇನಿದೆ?

ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.

ವರದಿಯಲ್ಲಿರುವ ಪ್ರಮುಖ ಅಂಶಗಳು  ಇಂತಿವೆ :

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಸಮಗ್ರ ರಾಜ್ಯ ವರದಿ

ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ

ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ)

ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಜಾತಿಗಳು)

ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಪಂಗಡಗಳು)

ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (ಎರಡು ಸಿಡಿಗಳು)

ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 2015 ರ ದತ್ತಾಂಶಗಳ ಅಧ್ಯಯನ ವರದಿ 2024

2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸುಮಾರು 154 ಕೋಟಿ ರೂ. ವೆಚ್ಚದಲ್ಲಿ ಮಾಡಿಸಲಾಗಿತ್ತು. ಆದರೆ ಅವರ ಅಧಿಕಾರ ಮುಗಿದ ನಂತರ ಆಡಳಿತ ನಡೆಸಿದ ಮುಖ್ಯಮಂತ್ರಿಗಳು ಕಾರಣಾಂತರಗಳಿಂದ ವರದಿ ಸ್ವೀಕರಿಸಿರಲಿಲ್ಲ. ಈ ಮಧ್ಯೆ ವರದಿ ಸೋರಿಕೆಯಾಗಿ, ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
21,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!