Sunday, September 8, 2024

ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ರೂ.1,500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ. ಮೊದಲಿಗೆ ಒಣ ಭೂಮಿ ಇರುವ ಜಮೀನುಗಳಿಗೆ ನೀರು ಒದಗುತ್ತದೆ. ಎರಡನೆಯದಾಗಿ ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಅಭಿವೃದ್ಧಿ ಕೂಡ ಆಗುತ್ತದೆ‌. ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿ ಯೋಜನೆಗಳಿಂದಾಗಿ ಇಂದು ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಅನಿರೀಕ್ಷಿತ ಪ್ರಮಾಣದಲ್ಲಿ ಸುಧಾರಣೆ ಕಂಡಿದೆ ಎಂದು ಅವರು ಹೇಳಿದರು.

ಕೇಂದ್ರದ ಹಾಲಿ ಸರ್ಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಸ್ವಲ್ಪವೂ ಸಹಕಾರ ನೀಡಲಿಲ್ಲ. ಬೆಳಗಾವಿಯಲ್ಲಿ ಗೆದ್ದಿರುವ ಇಬ್ಬರು ಸಂಸದರು ಸೇರಿ ಬಿಜೆಪಿಯ ಒಬ್ಬೇ ಒಬ್ಬ ಸಂಸದ ಪಾರ್ಲಿಮೆಂಟಲ್ಲಿ ದ್ವನಿ ಎತ್ತಲಿಲ್ಲ. ಇದು ಬೆಳಗಾವಿ ಜನತೆಗೆ, ರಾಜ್ಯದ ಜನತೆಗೆ ಬಿಜೆಪಿ ಸಂಸದರು ಬಗೆದ ದ್ರೋಹ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನೀರಾವರಿ ಯೋಜನೆಗಳ ಬಗ್ಗೆಯೂ ಈ ಸಂಸದರು ಬಾಯಿಯನ್ನೇ ಬಿಡಲಿಲ್ಲ, ರಾಜ್ಯಕ್ಕೆ ಆರ್ಥಿಕವಾಗಿ ವಂಚಿಸುತ್ತಿರುವ ಬಗ್ಗೆಯೂ ತುಟಿ ಬಿಡದ ಈ ಸಂಸದರಿಗೆ ನೀವು ಕೊಟ್ಟ ಓಟಿಗೆ ಏನು ಗೌರವ ಬಂತು ಹೇಳಿ. ಬಿಜೆಪಿ ಇವತ್ತಿನವರೆಗೂ ನುಡಿದಂತೆ ನಡೆದ ಒಂದೇ ಒಂದು ಉದಾಹರಣೆ ಇದೆಯಾ ನೀವೇ ವಿಚಾರ ಮಾಡಿ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ಕೊಟ್ಟ ಓಟಿಗೆ ಗೌರವ ಕೊಟ್ಟಿದ್ದೇವೆ. ಹೌದೋ ಇಲ್ಲವೋ ಎದೆ ಮುಟ್ಟಿಕೊಂಡು ಕೇಳಿಕೊಳ್ಳಿ. ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ ? – ದೇವರ ಹೆಸರಲ್ಲಿ ನಿಮ್ಮ ಭಾವನೆ ಕೆರಳಿಸಿ ನಿಮ್ಮ ಬದುಕಿಗೆ ವಂಚಿಸುತ್ತಿರುವ ಬಿಜೆಪಿ ಬೇಕಾ? ನಿಮ್ಮ ಹೃದಯವನ್ನು ಕೇಳಿಕೊಳ್ಳಿ. ನಿಮ್ಮ ಹೃದಯ ಹೇಳಿದವರಿಗೆ ಬೆಂಬಲಿಸಿ ಎಂದು ಹೇಳಿದರು.

ನರೇಂದ್ರ ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕೆಲಸ ಮಾಡಿದವರಿಗೆ ನೀವು ಕೂಲಿ ಕೊಡಬೇಕು ಅಲ್ಲವೇ?  ನಾಡಿನ ಬಡವರ, ಮಧ್ಯಮ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದು ತಪ್ಪಾ? ಆದರೆ ಬಿಜೆಪಿ ಇದನ್ನು ವಿರೋಧಿಸುತ್ತಿದೆ. ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು BJP ಅವಮಾನಿಸುತ್ತಿದೆ. ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ ಎಂದು ಅವರು ಜನರನ್ನು ಕೇಳಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!