Sunday, September 8, 2024

ಜು.17ರಿಂದ 20: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಸಾಂಸ್ಕೃತಿಕ ಉತ್ಸವ | ಸಿರಿಬಾಗಿಲು ಯಕ್ಷ ವೈಭವ-ಪ್ರಶಸ್ತಿ ಪ್ರದಾನ

ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪಿತಾಮಹ’ ಪಾರ್ತಿಸುಬ್ಬನ ಜನ್ಮನಾಡು, ಕುಂಬ್ಳೆ ಸೀಮೆಯ ಸಿರಿಬಾಗಿಲಿನಲ್ಲಿ ಪ್ರಪ್ರಥಮ ಬಾರಿಗೆ ಹವ್ಯಾಸಿ ಕಲಾತಂಡಗಳ ಚಾರಿತ್ರಿಕ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣ, ಭರತನಾಟ್ಯ, ಕನ್ನಡ ನಾಡಗೀತೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ಜು. ತಿಂಗಳ 17, 18, 19,20ರಂದು ಕೇರಳ ರಾಜ್ಯದ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಕನ್ನಡಪರ ಹಾಗೂ ಸಾಂಸ್ಕೃತಿಕ ವಲಯದ ಹಲವು ಅಧ್ಯಯನ ಯೋಗ್ಯ ಚಟುವಟಿಕೆಗಳಿಗೆ ತನ್ನನ್ನು ಅರ್ಪಿಸಿಕೊಂಡಿರುವ ಪ್ರತಿಷ್ಠಾನವು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ಸರಕಾರ ಇವರ ಸಹಯೋಗದೊಂದಿಗೆ ’ಕರ್ನಾಟಕ ಸಂಭ್ರಮ – 50 ಸವಿ ನೆನಪು -2023-24’ ಮತ್ತು ಕಲಾಪೋಷಕರ ಸಹಕಾರದೊಂದಿಗೆ ನಡೆಯಲಿದೆ ಎಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ತಿಳಿಸಿದರು.

ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಜು. 17ನೇ ಬುಧವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗಾನ ಕಲಾಪೋಷಕರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೈದರಾಬಾದಿನ ಹೋಟೆಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಗಡಿಪ್ರದೇಶ ಪ್ರಾಧಿಕಾರದ ಸದಸ್ಯ ಎಂ. ಆರ್. ಸುಬ್ಬಯ್ಯಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯ ಸತೀಶ ಅಡಪ ಸಂಕಬೈಲು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಲ್ಕು ದಿನಗಳಲ್ಲಿ ಐದು ಜಿಲ್ಲೆಗಳಿಂದ ತೆಂಕುತಿಟ್ಟು ಹಾಗೂ ಬಡಗುತಿಟ್ಟಿನ 26 ಹವ್ಯಾಸಿ ಯಕ್ಷಗಾನ ತಂಡಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಸ್ಥಳೀಯ ಯುವ ಪ್ರತಿಭೆಗಳ ಭರತನಾಟ್ಯ, ಕನ್ನಡ ಭಾವಗೀತೆಗಳ ಗಾಯನ ಈ ಕಾರ್ಯಕ್ರಮದ ಜೊತೆ ನಡೆಯಲಿದೆ ಎಂದರು.

ಜು.20ನೇ ತಾರೀಕು ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಸಿರಿಬಾಗಿಲು ಪ್ರತಿಷ್ಠಾನ ಪ್ರಕಾಶಿಸಿದ 7 ಗ್ರಂಥಗಳ ಕುರಿತಾದ ವಿಚಾರ ಸಂಕಿರಣ ನಡೆಯಲಿದೆ. ಇದರಲ್ಲಿ ಶ್ರೀಧರ ಡಿ. ಎಸ್, ರಾಧಾಕೃಷ್ಣ ಉಳಿಯತ್ತಡ್ಕ, ರಾಧಾಕೃಷ್ಣ ಕಲ್ಚರ್, ಲಕ್ಷ್ಮಿ ಮಚ್ಚಿನ, ಡಾ. ನಾಗವೇಣಿ ಮಂಚಿ, ಕುಮಾರ ಸುಬ್ರಮಣ್ಯ ಮುಳಿಯಾಲ ಮತ್ತು ರಾಘವೇಂದ್ರ ಉಡುಪ ನೇರಳೆಕಟ್ಟೆ ಪುಸ್ತಕಗಳ ಬಗ್ಗೆ ವಿಮರ್ಶೆ ನಡೆಸಿಕೊಡಲಿದ್ದಾರೆ ಎಂದು ಹೇಳಿದರು.

ಸಮಾರೋಪ ಸಮಾರಂಭ ಸಂಜೆ 4 ಗಂಟೆಗೆ ನಡೆಯಲಿದ್ದು, ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು, ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಕೊಂಡೆಯೂರು ಮಠ ಉಪ್ಪಳ ಆಶೀರ್ವಚನ ನೀಡಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕೇಂದ್ರ ಹಂಗಾರಕಟ್ಟೆ ಐರೋಡಿ ಇದರ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಐರೋಡಿ, ಕೆ. ಆರ್. ಆಳ್ವ ಕಂಬಾರು, ಟಿ. ಎಮ್. ಸತೀಶ ಬೆಂಗಳೂರು, ಅಗರಿ ಎಂಟರ್ಪ್ರೈಸಸ್ ಮಾಲಕ ಅಗರಿ ರಾಘವೇಂದ್ರರಾವ್, ಮಾಂಡವಿ ಮೋಟರ್ಸ್ ಮಂಗಳೂರುನ ವ್ಯವಸ್ಥಾಪಕ ಶಶಿಧರ ಕಾರಂತ , ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡು ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ್ ತೊಟ್ಟೆತೋಡಿ, ಕರ್ನಾಟಕ ಬ್ಯಾಂಕ್ ನ ಸುಜಿತ್ ಕುಮಾರ, ಪುಳ್ಕೂರು ಮಹಾದೇವ ದೇವಸ್ಥಾನದ ಅಧ್ಯಕ್ಷ ಶೀನ ಶೆಟ್ಟಿ ಕಜೆ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪ್ರಸಂಗಕರ್ತ ಶ್ರೀಧರ ಡಿ.ಎಸ್, ಬಹುಭಾಷಾ ವಿದ್ವಾಂಸ ಕೊಕ್ಕಡ ವೆಂಕಟ್ರಮಣ ಭಟ್ ಮಂಡ್ಯ, ಗಡಿನಾಡ ಸಂಗೀತ ವಿದ್ವಾನ್ ಶ್ರೀಮತಿ ಶಕುಂತಲಾ ಕೆ. ಕುಂಚಿನಡ್ಕ ಇವರಿಗೆ ಸಿರಿ ಬಾಗಿಲು ವೆಂಕಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ. ಇವರ ಅಭಿನಂದನಾ ಭಾಷಣವನ್ನು ಹಿರಿಯ ವಿದ್ವಾಂಸ ಜಿ. ಕೆ. ಭಟ್ ಸೇರಾಜೆ ಯವರು ನೆರವೇರಿಸಲಿದ್ದಾರೆ. ಪ್ರತಿಷ್ಠಾನದ ಬೆಳವಣಿಗೆಗೆ ಸಹಕರಿಸಿದ ಗಣ್ಯರಿಗೆ ಗೌರವಾರ್ಪಣೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕ, ಕಲಾವಿದ ಡಾ. ಶ್ರತಕೀರ್ತಿ ರಾಜ್ ಉಜಿರೆ,ಮಾಂಡೋವಿ ಮೋಟಾರ್ಸ್, ಹಂಪನಕಟ್ಟೆ. ಮಂಗಳೂರು ಇದರ ಮೆನೇಜರ್ ಶಶಿಧರ ಕಾರಂತ, ಸಿರಿಬಾಗಿಲು ಪ್ರತಿಷ್ಠಾನದ ಸದಸ್ಯ ಜಗದೀಶ ಕೆ. ಕೂಡ್ಲು, ಲಕ್ಷ್ಮಣ ಕುಮಾರ್ ಮರಕಡ ಉಪಸ್ಥಿತರಿದ್ದರು.

 

https://fb.watch/tlHDJ3MB-H/

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!