spot_img
Wednesday, April 1, 2026
spot_img

ಜಾರ್ಖಂಡ್ ರಾಜ್ಯದ ಬೊಕಾರೋ ಉಕ್ಕು ಸ್ಥಾವರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ | 2070ರ ವೇಳೆಗೆ ಇಂಗಾಲ ಹೊರಸೂಸುವಿಕೆ ಶೂನ್ಯ ಮಟ್ಟಕ್ಕೆ

ಜನಪ್ರತಿನಿಧಿ (ಜಾರ್ಖಂಡ್) : ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಿಯೇ ತೀರುತ್ತೇವೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದಲ್ಲಿಯೇ ಅತಿದೊಡ್ಡ ಉಕ್ಕು ಉತ್ಪಾದನಾ ಕಾರ್ಖಾನೆಗಳಲ್ಲಿ ಒಂದಾಗಿರುವ ಜಾರ್ಖಂಡ್ ರಾಜ್ಯದ ಬೊಕಾರೋ ಉಕ್ಕು ಸ್ಥಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಚಿವರು; ಪ್ರಧಾನಿಗಳು ನಿಗದಿ ಮಾಡಿರುವ ಗುರಿ ದೊಡ್ಡದಿದೆ. ಆದರೆ, ಅದನ್ನು ಮುಟ್ಟುತ್ತೇವೆ ಎನ್ನುವ ಅಚಲ ವಿಶ್ವಾಸವಿದೆ. ಬೊಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಮೇಲೆ ಆ ವಿಶ್ವಾಸ ಇಮ್ಮಡಿಯಾಗಿದೆ ಎಂದು ಹೇಳಿದರು.

ಅಲ್ಲದೆ, ಉಕ್ಕು ಉತ್ಪಾದನೆಯಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಸಂಪೂರ್ಣ ಶೂನ್ಯಕ್ಕೆ ಇಳಿಸುವುದು ಕೇಂದ್ರ ಸರಕಾರದ ಗುರಿ. 2070ರ ವೇಳೆಗೆ ಇಂಗಾಲದ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುತ್ತೇವೆ ಎಂದು ಅವರು ಪಣ ತೊಟ್ಟರು.

ಉಕ್ಕು ಖಾತೆಯ ಸಹಾಯಕ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮ, ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮೇರೆಂದು ಪ್ರಕಾಶ್ ಮುಂತಾದ ಉನ್ನತ ಅಧಿಕಾರಿಗಳ ಜತೆ ಬೊಕಾರೋ ಕಾರ್ಖಾನೆಯನ್ನು ವೀಕ್ಷಿಸಿದ ಸಚಿವರು; ಭಾರತದ ಉಕ್ಕು ಬೇಡಿಕೆಯನ್ನು ಪೂರೈಸುವಲ್ಲಿ ಈ ಸ್ಥಾವರ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಸ್ಥಾವರಕ್ಕೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ಹೇಳಿದರು.

ಉಕ್ಕು ಉದ್ಯಮ ಭಾರತದ ಸುಸ್ಥಿರ ಅಭಿವೃದ್ಧಿಯ ಬೆನ್ನೆಲುಬು. ಹೀಗಾಗಿ ಆತ್ಮನಿರ್ಭರ್ ಭಾರತದ ಪರಿಕಲ್ಪನೆಯ ಅಡಿಯಲ್ಲಿ ಕೇಂದ್ರ ಸರಕಾರ ನಿರ್ದಿಷ್ಟ ಕಾರ್ಯಸೂಚಿ ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಬೊಕಾರೊ ಉಕ್ಕು ಸ್ಥಾವರ ಉತ್ಕೃಷ್ಟತೆ ಎಂಜಿನಿಯರಿಂಗ್ ಮತ್ತು ಉತ್ಪಾದನಾ ಶ್ರೇಷ್ಠತೆಗೆ ಉಜ್ವಲ ಉದಾಹರಣೆಯಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿತಂತೆ ಉಕ್ಕು ಕ್ಷೇತ್ರದಲ್ಲಿ ನಿರಂತರ ಸುಸ್ಥಿರತೆ, ನಾವೀನ್ಯತೆ ಮತ್ತು ನಮ್ಮ ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡುವುದರೊಂದಿಗೆ ನಾವು ಭಾರತವನ್ನು ಜಾಗತಿಕ ಉಕ್ಕಿನ ಶಕ್ತಿ ಕೇಂದ್ರವಾಗಿ ಪರಿವರ್ತಿಸುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ರಕ್ಷಣಾ ಮತ್ತು ಹಸಿರು ಉಕ್ಕಿನ ಮೇಲೆ ಕೇಂದ್ರೀಕರಿಸಿ

ಬೊಕಾರೊ ಉಕ್ಕು ಕಾರ್ಖಾನೆಯ ಆಡಳಿತ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಕುಮಾರಸ್ವಾಮಿ ಅವರಿಗೆ 3D ನಕ್ಷೆಯನ್ನು ತೋರಿಸಲಾಯಿತು. ಅಲ್ಲಿಂದಲೇ ಸ್ಥಾವರದ ಕಾರ್ಯಾಚರಣೆಗಳ ಸಮಗ್ರ ಅವಲೋಕನವನ್ನು ಮಾಡಿದ ಸಚಿವರು; ನಂತರ ಪ್ರತಿ ವಿಭಾಗಕ್ಕೂ ಭೇಟಿ ಕೊಟ್ಟರು. ಮುಖ್ಯವಾಗಿ ಊದು ಕುಲುಮೆ (ಬ್ಲಾಸ್ಟ್ ಫರ್ ನೆಸ್) ಗಳನ್ನು ಸಚಿವರು ವೀಕ್ಷಿಸಿದರು.

ಬೊಕಾರೋ ಉಕ್ಕು ಕಾರ್ಖಾನೆಯಿಂದ ಭಾರತೀಯ ನೌಕಾಪಡೆ ಮತ್ತು ಇತರೆ ರಕ್ಷಣಾ ವಲಯಗಳಿಗೆ ಭಾರೀ ಪ್ರಮಾಣದಲ್ಲಿ ಅತ್ಯುತ್ತಮ ಗುಣಮಟ್ಟದ ಡಿಎಂಆರ್ ಪ್ಲೇಟ್‌ಗಳನ್ನು ಸರಬರಾಜು ಮಾಡಲಾಗುತ್ತದೆ. ದೇಶ ರಕ್ಷಣೆಯಲ್ಲಿ ಮಹತ್ವದ ಪಾತ್ರ ಪೋಷಿಸುವ ಡಿಎಂಆರ್ ಪ್ಲೇಟ್‌ಗಳ ತಯಾರಿಕೆ ಪ್ರಕ್ರಿಯೆಯನ್ನು ಸಚಿವರು ಖುದ್ದು ವೀಕ್ಷಿಸಿದರು. ಅಲ್ಲದೆ; ರಾಷ್ಟ್ರ ಭದ್ರತೆಗೆ ಕಾರ್ಖಾನೆ ನೀಡುತ್ತಿರುವ ಕೊಡುಗೆಯನ್ನು ಸಚಿವರು ಶ್ಲಾಘಿಸಿದರು.

ಇಂಗಾಲ ಹೊರಸೂಸುವಿಕೆ ಶೂನ್ಯ ಮಟ್ಟಕ್ಕೆ:

ಕಾರ್ಖಾನೆಯಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯ ಮಟ್ಟಕ್ಕೆ ಇಳಿಸುವಲ್ಲಿ ಕೈಗೊಳ್ಳಲಾಗಿರುವ ಉಪಕ್ರಮಗಳನ್ನು ಸಚಿವರು ವಿಶೇಷವಾಗಿ ಗಮನಿಸಿದರು. ಈ ಉದ್ದೇಶಕ್ಕಾಗಿ ಕಾರ್ಖಾನೆ ಕೈಗೊಂಡಿರುವ ಹಸರೀಕರಣ ಕಾರ್ಯಕ್ರಮಗಳನ್ನು ಸಚಿವರು ಮೆಚ್ಚಿಕೊಂಡರು.

2070ರ ವೇಳೆಗೆ ಉಕ್ಕು ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ತರಲೇಬೇಕು ಎಂದು ಒತ್ತಿ ಹೇಳಿದ ಸಚಿವರು; ಈ ವಿಷಯದಲ್ಲಿ ಯಾವುದೇ ರಾಜಿ ಬೇಡ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚಿನ ಉತ್ಪಾದನೆಗಾಗಿ ವಿಸ್ತರಣಾ ಯೋಜನೆಗಳು

ಇದೇ ಕೇಂದ್ರ ಸಚಿವರು ಸ್ಥಾವರದ ಮಹತ್ವಾಕಾಂಕ್ಷೆಯ ಕೆಲವಾರು ವಿಸ್ತರಣಾ ಯೋಜನೆಗಳನ್ನು ಪರಿಶೀಲಿಸಿದರು. ಮುಖ್ಯವಾಗಿ ವಾರ್ಷಿಕ 3.2 ದಶಲಕ್ಷ ಟನ್ ಉಕ್ಕು ಉತ್ಪಾದನೆ ಸಾಮರ್ಥ್ಯದ ಊದುಕುಲುಮೆಯ ಸ್ಥಾಪನೆ, ಹೊಸ ಸ್ಟಾಂಪ್ ಚಾರ್ಜ್ ಬ್ಯಾಟರಿಗಳು ಅಳವಡಿಕೆ, ಆಧುನಿಕ ಶೀತಲೀಕರಣ ಘಟಕ ಸ್ಥಾಪನೆ ಇತ್ಯಾದಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು ಹಾಗೂ ಎಲ್ಲಾ ಯೋಜನೆಗಳನ್ನು ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!