spot_img
Tuesday, March 17, 2026
spot_img

ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ : ಸಿದ್ದರಾಯ್ಯ ವಿರುದ್ಧ ಅಶೋಕ್‌ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ ಎಂದು ಆರ್.ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅಶೋಕ್, ಇತೀಚೆಗೆ ನಡೆದ ಎಐಸಿಸಿ ಅಧಿವೇಶನದ ಸಂದರ್ಭದಲ್ಲಿ, ದೆಹಲಿ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಭಾರಿ ಹಿನ್ನೆಡೆ ಆಗಿದೆ. ಹನಿಟ್ರಾಪ್ ಸೇರಿದಂತೆ ಸರ್ಕಾರದ ಸಾಲು ಸಾಲು ವೈಫಲ್ಯಗಳ ಬಗ್ಗೆ, ಎಡವಟ್ಟುಗಳು ವಿಚಾರವಾಗಿ ಹೈಕಮಾಂಡ್ ಸಿದ್ದರಾಮಯ್ಯನವರ ಬಣದ ಕಿವಿ ಹಿಂಡಿದೆ. ಆದ್ದರಿಂದಲೇ ಈಗ ಸಿದ್ದರಾಮಯ್ಯನವರು ಧಿಡೀರನೆ ಜಾತಿ ಜನಗಣತಿ ಜಪ ಮಾಡುತ್ತಿದ್ದಾರೆ ಎನ್ನುವ ಗುಸುಗುಸು ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿದೆ ಎಂದಿದ್ದಾರೆ.

ನಾನು ಈಗಾಗಲೇ ಹಲವಾರು ಬಾರಿ ಹೇಳಿರುವಂತೆ ನಮ್ಮ ಸಮಾಜದಲ್ಲಿರುವ ತಳಸಮುದಾಯಗಳ ಅಭ್ಯುದಯಕ್ಕೆ ಯಾವುದೇ ಸಕಾರಾತ್ಮಕ ಹೆಜ್ಜೆ ಇಟ್ಟರೂ ಅದಕ್ಕೆ ನಮ್ಮ ಪಕ್ಷದ ಬೆಂಬಲವಿದೆ. ಆದರೆ ರಾಜಕೀಯ ಹಾವು ಏಣಿ ಆಟದಲ್ಲಿ ಕೆಳಗೆ ಬಿದ್ದಾಗಲೆಲ್ಲ, ಅಧಿಕಾರದ ಚದುರಂಗದಾಟದಲ್ಲಿ ಮುಗ್ಗರಿಸಿದಾಗಲೆಲ್ಲ ಮೇಲೇಳುವುದಕ್ಕೆ ತಳಸಮುದಾಯಗಳನ್ನ ದಾಳವಾಗಿ ಬಳಸುವುದಕ್ಕೆ ನಮ್ಮ ವಿರೋಧವಿದೆ.

ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ, ಅವಾಸ್ತವಿಕ ಹಾಗು ಅಪ್ರಸ್ತುತ ಎನ್ನುವುದು ಬಹುತೇಕರ ಅಭಿಪ್ರಾಯ. ಇದಕ್ಕೆ ಅನೇಕ ಕಾರಣಗಳೂ ಇವೆ. ಈ ಹಿನ್ನಲೆಯಲ್ಲಿ ರಾಜ್ಯದ ಜನತೆಯ ಪರವಾಗಿ ಸಿಎಂ ಸಿದ್ದರಾಮಯ್ಯನವರ ಮುಂದೆ ಕೆಲವು ಗಂಭೀರವಾದ ಪ್ರಶ್ನೆಗಳನ್ನು ಇಡುತ್ತಿದ್ದೇನೆ.

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ.

ಟ್ವೀಟ್‌ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಆರ್.‌ ಅಶೋಕ್‌ ಸಾಲು ಸಾಲು ಪ್ರಶ್ನೆ 

1.) ಜಾತಿ ಜನಗಣತಿ ವರದಿಗೆ ಆಯೋಗದ ಕಾರ್ಯದರ್ಶಿ ಸಹಿ ಮಾಡಿಲ್ಲ ಎನ್ನುವ ಅನುಮಾನವಿದೆ. ಇದು ನಿಜವೇ? ಒಂದು ವೇಳೆ ಸಹಿ ಮಾಡಿಲ್ಲವಾದರೆ ಯಾಕೆ ಮಾಡಿಲ್ಲ?

2.) ಸೀಲ್ಡ್ ಬಾಕ್ಸ್ನಲ್ಲಿದ್ದ ಮೂಲ ಪ್ರತಿ ಅಥವಾ ಹಸ್ತಪ್ರತಿ ಲಭ್ಯವಿಲ್ಲವೆಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರು ಹೇಳಿದ್ದರು. ಇದರ ಸತ್ಯಾಸತ್ಯತೆ ಏನು?

3.) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

4.) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?

5.) ಹತ್ತು ವರ್ಷಗಳ ಹಿಂದೆ ನಡೆಸಿರುವ ಈ ಸಮೀಕ್ಷೆ ಈಗ ಪ್ರಸ್ತುತವೇ ಅಲ್ಲ ಎನ್ನುವುದಕ್ಕೆ ತಮ್ಮ ಉತ್ತರವೇನು?

6.) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 22 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ? ಎಂದು ಪ್ರಶ್ನಿಸಿದ್ದಾರೆ.

7.) ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?

8.) ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ?

9.) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

10.) ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?

11.) ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು?

12.) ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಇವು ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಇರುವ ತಕರಾರು ಮತ್ತು ಅನುಮಾನ. ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಆಗ್ರಹಿಸುತ್ತೇನೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!