spot_img
Sunday, February 15, 2026
spot_img

ಬಸವಣ್ಣ ಅರ್ಥವಾಗಲು ʼಕರ್ಮಸಿದ್ಧಾಂತ, ಹಣೆಬರಹʼ ಎನ್ನುವ ಮೌಢ್ಯವನ್ನು ಬಿಡುವ ಶಪಥ ಮಾಡಬೇಕು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಕೂಡಲಸಂಗಮ) : ವಚನ ಎಂದರೆ ಮಾತು. ಶರಣರ ವಚನ ಜನರ ಭಾಷೆಯಲ್ಲಿವೆ. ಆದ್ದರಿಂದ ವಚನ ಸಾಹಿತ್ಯ, ಜನರ ಸಾಹಿತ್ಯವೇ ಆಗಿದೆ. ಹಿಂದೆ ಸಂಸ್ಕೃತ ಕಲಿತರೆ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇತ್ತು. ಇದರಿಂದಲೇ ಭಾರತೀಯ ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಶಿಕ್ಷಣ ಇಲ್ಲದ ಕಾರಣಕ್ಕೆ ಅಸಮಾನತೆ ಬೆಳೆಯಿತು. “ನಮ್ಮ‌ ಸಂವಿಧಾನ ವೈರುದ್ಯತೆ ಇರುವ ಸಮಾಜದಲ್ಲಿ ಜಾರಿ ಆಗುತ್ತಿದೆ. ಪ್ರಜಾಪ್ರಭುತ್ವದ ಕಾರಣದಿಂದ ರಾಷ್ಟ್ರಪತಿಯಿಂದ ಪೌರ ಕಾರ್ಮಿಕರವರೆಗೂ ಎಲ್ಲರಿಗೂ ಒಂದೇ ಮತ ಎನ್ನುವ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ಇದು ಸಿಗದೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎನ್ನುವ ಅಂಬೇಡ್ಕರ್ ಅವರ ಮಾತು ಇಂದಿಗೂ ಮನನ‌ ಮಾಡಿಕೊಳ್ಳುವಂತಹುದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಸವ ಜಯಂತಿ ಪ್ರಯುಕ್ತ ಕೂಡಲಸಂಗಮದಲ್ಲಿ ಆಯೋಜಿಸಿದ್ದ “ಶರಣರ ವೈಭವ – 2025” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇವನಾರವ ಇವನಾರವ ಎಂದು ವಚನ ಹೇಳೋದು, ಈ ಕಡೆ ಬಂದು ಅವನು ಯಾವ ಜಾತಿ ಎಂದು ಕೇಳೋದು ನಡೆಯುತ್ತಿದೆ. ಹೀಗಾದರೆ ಬಸವಣ್ಣನವರ ಆಶಯದಂತೆ ಜಾತಿ ನಿರ್ಮೂಲನೆ ಆಗಲ್ಲ. ಜಾತಿಗೆ ಚಲನೆಯಿಲ್ಲ. ವರ್ಗಕ್ಕೆ ಚಲನೆ ಇದೆ. ಎಲ್ಲಾ ಜಾತಿಗಳಿಗೂ ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ನಿರ್ಮೂಲನೆ ಸಾಧ್ಯ. ಇವನಾರವ ಇವನಾರವ ಎಂದು ವಚನ ಹೇಳುತ್ತಲೇ ಜಾತಿ ಮಾಡುವವರು ಇದ್ದಾರೆ. ಬಸವಣ್ಣನವರು ಮತ್ತು ಶರಣರು ಕರ್ಮಸಿದ್ಧಾಂತದ ವಿರುದ್ಧ ಹೋರಾಟ ನಡೆಸಿದರು. ಆದರೆ ಈಗ ಶಿಕ್ಷಣ ಪಡೆದವರೇ ಜನ್ಮ ಜನ್ಮಗಳಲ್ಲಿ ನಂಬಿಕೆ ಇಟ್ಟು ಕರ್ಮ ಸಿದ್ಧಾಂತ ಆಚರಿಸುತ್ತಿದ್ದಾರೆ. ಒಂದು ಕಡೆ ಬಸವ ಜಯಂತಿ ಆಚರಿಸೋದು ಮತ್ತೊಂದು ಕಡೆ ಕರ್ಮಸಿದ್ಧಾಂತ ಆಚರಿಸೋದು ಮಾಡಿದರೆ ಬಸವ ಜಯಂತಿಗೆ ಅರ್ಥ ಇಲ್ಲ ಎಂದರು.

ಬಸವಣ್ಣ ಅರ್ಥ ಆಗಬೇಕು ಅಂದರೆ ಮೊದಲು ಕರ್ಮಸಿದ್ಧಾಂತ ಮತ್ತು ಹಣೆಬರಹ ಎನ್ನುವ ಮೌಢ್ಯವನ್ನು ಬಿಡುವ ಶಪಥ ಮಾಡಬೇಕು. ಆಚಾರವೇ ಸ್ವರ್ಗ-ಅನಾಚಾರವೇ ನರಕ ಎನ್ನುವ ಬಸವಣ್ಣನವರ ಮೌಲ್ಯ ಪಾಲಿಸುವ ಶಪಥ ಮಾಡಿ ನೋಡೋಣ. ಧರ್ಮ ಎಂದರೆ ಭಯಾನಕವಾಗಿ ರಾಶಿ ರಾಶಿ ಏನೇನೋ ಹೇಳ್ತಾರೆ. ಇದ್ಯಾವುದೂ ಧರ್ಮ ಅಲ್ಲ. ಬಸವಣ್ಣನವರು ಬಹಳ ಸರಳವಾಗಿ “ದಯೆಯೇ ಧರ್ಮದ ಮೂಲವಯ್ಯ” ಎಂದಿದ್ದಾರೆ. ಇಷ್ಟು ಸರಳ ಮತ್ತು ಸುಂದರವಾದ ಮೌಲ್ಯವೇ ಧರ್ಮ. ಬಸವಣ್ಣನವರ ಆಶಯಗಳು, ಬಸವಣ್ಣನವರ ಮೌಲ್ಯಗಳು, ಅಂಬೇಡ್ಕರ್ ಅವರ ಸಂವಿಧಾನದ ಆಶಯ ಮತ್ತು ಮೌಲ್ಯಗಳು ಒಂದೇ ಆಗಿವೆ. ಇದನ್ನು ಅರ್ಥ ಮಾಡಿಕೊಂಡು, ಪಾಲಿಸದೇ ಹೋದರೆ ಕೇವಲ ಬಸವಣ್ಣನವರ ಬಗ್ಗೆ ಭಾಷಣ ಮಾಡುವುದರಿಂದ ಸಮಾಜಕ್ಕೆ ಎನೂ ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದವರು ಹೇಳಿದರು.

ಗೋರುಚ ಅವರ ಸಮಿತಿ ವರದಿಯಂತೆ ಅನುಭಾವಿಗಳ ಅನುಭವ ಮಂಟಪ ಮಾಡುವ ಕೆಲಸ ಆಗಿದ್ದು ನಮ್ಮಿಂದ. ಇದನ್ನು ಈ ವರ್ಷವೇ ಪೂರ್ಣಗೊಳಿಸುತ್ತೇವೆ. ಬಸವಣ್ಣರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಾವೇ. ಅಕ್ಕಮಹಾದೇವಿ ವಿಶ್ವ ವಿದ್ಯಾಲಯ ನಾಮಕಾರಣ ಮಾಡಿದ್ದು ನಾವೇ. ಇದಕ್ಕೆ ಶರಣರ ಬದುಕು ಸ್ಪೂರ್ತಿಯಾಗಿದೆ. ಕನಕದಾಸರು, ಬಸವಣ್ಣ ಇಬ್ಬರೂ ಸಂಸ್ಕೃತದಲ್ಲಿ ಏನೂ ಹೇಳಲಿಲ್ಲ. ಜನರ ಭಾಷೆಯಲ್ಲಿ, ಜನರಿಗೆ ಅರ್ಥ ಆಗುವ ರೀತಿ ಅತ್ಯಂತ ಸರಳವಾಗಿ ಧರ್ಮ ಮತ್ತು ಮೌಲ್ಯವನ್ನು ಸಾರಿದರು. ಯಾವ ಭಾಷೆಯನ್ನಾದರೂ ಕಲಿಯಿರಿ. ಆದರೆ ಜನರಾಡುವ ಭಾಷೆಯಲ್ಲಿ ಮಾತನಾಡಿ, ಮೌಲ್ಯಗಳನ್ನು ವಿವರಿಸಿ ಎಂದರು. ಮಾತೃಭಾಷೆ, ತಾಯಿ ಭಾಷೆ, ನಮ್ಮ ನೆಲದ ಭಾಷೆಯಲ್ಲಿ ಬಸವಾದಿ ಶರಣರು ತಮ್ಮ ಅನುಭವಗಳನ್ನು ಜನರಿಗೆ ತಿಳಿಸಿದರು.

ಬಸವಾದಿ ಶರಣರ ಆಶಯ ಮತ್ತು ಮೌಲ್ಯಗಳನ್ನು ನಾನು ಜಾರಿಗೆ ತರಲು ಮುಂದಾದರೆ ಅದಕ್ಕೂ ಅಡ್ಡಿಪಡಿಸುವವರು, ವಿರೋಧಿಸುವವರು ಇದ್ದಾರೆ. ಆದ್ದರಿಂದ ಸಮ ಸಮಾಜ ಬೇಕೋ? ಜಾತಿ ಸಮಾಜ ಬೇಕೋ? ಎನ್ನುವ ನಿರ್ಧಾರವನ್ನು ಜನರಿಗೇ ಬಿಡುತ್ತಿದ್ದೇನೆ. ದೇವರಿಗೂ ಮತ್ತು ಜನರಿಗೂ ನಡುವೆ ಮಧ್ಯವರ್ತಿಗಳು ಇರಬಾರದು ಎನ್ನುವುದೇ ಬಸವಣ್ಣನವರ ಮಾತಾಗಿತ್ತು. ಅದಕ್ಕೇ ದೇಹವೇ ದೇಗುಲ ಎಂದು ವಚನ ರಚಿಸಿದರು. ಬಸವಾದಿ ಶರಣರ ಆಶಯದಂತೆ ಇಷ್ಟಲಿಂಗ ಪೂಜೆ ಮಾಡುವಾಗಲಾದರೂ ಮಧ್ಯವರ್ತಿಗಳು ಇರಬಾರದು.

ಮನುವಾದಿಗಳು ಬಸವತತ್ವದ ವಿರೋಧಿಗಳು. ಮನುಷ್ಯ ತತ್ವಕ್ಕೆ ವಿರುದ್ಧ ಇರುವವರು ಮನುವಾದಿಗಳು. ಮನುಷ್ಯತ್ವ ಪಾಲಿಸುವವರು ಬಸವವಾದಿಗಳು. ಆಯ್ಕೆ ನಿಮ್ಮದು. ಮನುವಾದಿಗಳು ಬೇಕೋ, ಬಸವವಾದಿಗಳು ಬೇಕೋ ನೀವೇ ನಿರ್ಧರಿಸಿ. ಪ್ರಜಾಪ್ರಭುತ್ವ ಹುಟ್ಟಿದ್ದು ಇಂಗ್ಲೆಂಡ್ ನಲ್ಲಿ ಅಲ್ಲ. 900 ವರ್ಷಗಳ ಹಿಂದೆ ಸ್ಥಾಪಿತವಾದ ಅನುಭವ ಮಂಟಪವೇ ಮೊದಲ ಪ್ರಜಾಪ್ರಭುತ್ವದ ಕೇಂದ್ರ. ವಿಶ್ವಕ್ಕೆ ಪ್ರಜಾಪ್ರಭುತ್ವ ಪರಿಚಯಿಸಿದ ನಮ್ಮ ಭಾರತ ದೇಶ ಇಂದು ಸರ್ವಾಧಿಕಾರದ ಕಡೆ ಮುಖ ಮಾಡುತ್ತಿರುವುದು ದುರಂತ ಎಂದರು.

ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ. ಸರ್ವಾಧಿಕಾರದಲ್ಲಿ ಚರ್ಚೆಗೆ ಅವಕಾಶ ಇಲ್ಲ, ಏಕಮುಖವಾಗಿ “ನಾನು ಹೇಳಿದ್ದನ್ನು ನೀವು ಕೇಳಿ” ಎನ್ನುವುದಷ್ಟೆ ಇರುತ್ತದೆ. “ಮನ್ ಕಿ ಬಾತ್” ರೀತಿ ನಾನು ಹೇಳ್ತೀನಿ, ನೀವು ಕೇಳಿ ಅನ್ನೋದು ಸರ್ವಾಧಿಕಾರಿ ಧೋರಣೆ.  ಆರ್ಥಿಕ ಅಸಮಾನತೆಯು ಗುಲಾಮಗಿರಿ ಬೆಳೆಸುತ್ತದೆ, ಸ್ವಾಭಿಮಾನ ಅಳಿಸುತ್ತದೆ. ಕಾಯಕ ಮತ್ತು ದಾಸೋಹ ಬಸವಾದಿ ಶರಣರು ನಮಗೆ ಕೊಟ್ಟಿರುವ ಆರ್ಥಿಕ‌ ಸಿದ್ಧಾಂತ. ಇದನ್ನು ಪಾಲಿಸಿದರೆ ಮಾತ್ರ ಬಸವ ಜಯಂತಿ ಆಚರಣೆಗೆ ಅರ್ಥ ಬರುತ್ತದೆ. ಕಲ್ಯಾಣಮ್ಮ‌ ಜನಸ್ಥಳವನ್ನು ಅಭಿವೃದ್ಧಿ ಪಡಿಸಲಾಗಿವುದು, ಬಸವಣ್ಣ ನೀಲಾಂಬಿಕೆಯ ವಿಗ್ರಹವನ್ನೂ ಮಾಡಿಸೋಣ. ಇವೆಲ್ಲವನ್ನೂ ನಾವು ಮಾಡ್ತೀವಿ. ಆದರೆ ನೀವೂ ಸ್ವಲ್ಪ ಬದಲಾಗಿ, ಎಲ್ಲರನ್ನೂ “ಇವ ನಮ್ಮವ” ಎನ್ನಬೇಕು. ಇಷ್ಟೇ ನನ್ನ ಮನವಿ ಎಂದವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!