spot_img
Thursday, April 2, 2026
spot_img

ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳಿಗೆ ಸೂಚನೆ ನೀಡಿದರು.

ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ೬೬ ರ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷದಿಂದ ೨೫೦ ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವು-ನೋವುಗಳು ಉಂಟಾಗಿವೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಕಳೆದ ಎರಡು ತಿಂಗಳಿಂದ ರಸ್ತೆ ಅಪಘಾತದಲ್ಲಿ ೮ ಕ್ಕೂ ಹೆಚ್ಚು ಜನ ಅಪಘಾತದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರು ಟೋಲ್ ಸಂಗ್ರಹವನ್ನು ಮಾಡುವುದೊಂದೆ ಗುರಿಯಾದರೆ ಸಾಲದು. ಹೆಚ್ಚು ಅಪಘಾತವಾಗುತ್ತಿರುವ ಕಪ್ಪು ಚುಕ್ಕೆ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಳ್ಳುವುದು, ರಸ್ತೆ ದಾರಿದೀಪಗಳನ್ನು ಅಳವಡಿಸುವುದು, ಸೂಚನಾ ಫಲಕಗಳನ್ನು ಅಳವಡಿಸುವುದು ಮತ್ತಿತರ ಕಾರ್ಯಗಳನ್ನು ಒಂದು ತಿಂಗಳ ಒಳಗಾಗಿ ಕೈಗೊಳ್ಳುವುದರೊಂದಿಗೆ ಅಪಘಾತ ಮುಕ್ತ ವಲಯವನ್ನಾಗಿಸಲು ಮುಂದಾಗಬೇಕೆಂದು ರಾಷ್ಟ್ರೀಯ ಹೆದ್ದಾರಿಯ ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಹೆಜಮಾಡಿಯಿಂದ ಕುಂದಾಪುರ ವರೆಗೂ ೬೬ ಕಿ.ಮೀ ವರೆಗೂ ಸವೀಸ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ಅವಶ್ಯಕತೆ ಇದ್ದು, ಪ್ರಸ್ತುತ ಕೋಟೇಶ್ವರದಿಂದ ಹೆಜಮಾಡಿವರೆಗೆ ೨೬ ಕಿ.ಮೀ ಸವೀಸ್ ರಸ್ತೆ ಹಾಗೂ ೩ ಫೂಟ್ ಓವರ್ ಬ್ರಿಡ್ಜ್ ಕಾಮಗಾರಿಗೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ಶೇ.೭೦ ಕ್ಕೂ ಹೆಚ್ಚು ಕಾಮಗಾರಿಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಸಂಗ್ರಹಿಸಿ, ಶೇಖರಣೆಗೊಳಿಸುವುದರೊಂದಿಗೆ ಸವೀಸ್ ರಸ್ತೆ ಕಾಮಗಾರಿಗಳನ್ನು ಪ್ರಾರಂಭಿಸಬೇಕೆಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯ ಪಡುಬಿದ್ರೆ, ಬ್ರಹ್ಮಾವರ ಹಾಗೂ ಕೋಟದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಡಿ.ಪಿ.ಆರ್ ಅನ್ನು ಕೂಡಲೇ ತಯಾರಿಸಿ, ನೀಡಿದ್ದಲ್ಲಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮತಿಯನ್ನು ದೊರಕಿಸಿ ಕೊಡಲಾಗುವುದು. ಈ ಕಾರ್ಯಕ್ಕೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವ ಹಾಗೆ ಕಾಮಗಾರಿಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಅಳವಡಿಸಬೇಕು. ಪಡುಬಿದ್ರೆಯಲ್ಲಿ ದಾರಿದೀಪಗಳು ಸರಿಯಾದ ನಿರ್ವಹಣೆ ಇಲ್ಲದೇ ಅಪಘಾತಗಳು ಆಗುತ್ತಿವೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಗುತ್ತಿಗೆದಾರರು ಈ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಸೂಚನೆ ನೀಡಿದ ಅವರು, ಇವುಗಳ ನಿರ್ವಹಣೆ ಸರಿಯಿಲ್ಲದೇ ಅಪಘಾತಗಳು ಆದಲ್ಲಿ ಸಂಬಂಧಪಟ್ಟ ಅಭಿಯಂತರರುಗಳು ಹಾಗೂ ಗುತ್ತಿಗೆದಾರರ ಮೇಲೂ ಸಹ ನಿರ್ಲಕ್ಷ್ಯ ವಹಿಸಿರುವುದರ ಬಗ್ಗೆ ಪ್ರಕರಣದಲ್ಲಿ ಅಪರಾಧಿಯನ್ನಾಗಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೆಲವು ದಾರಿದೀಪಗಳನ್ನು ಅಳವಡಿಸಿದ್ದು, ಅವುಗಳು ಪ್ರಕಾಶಮಾನವಾಗಿ ಇಲ್ಲದೇ ಇರುವುದು ಕಂಡುಬರುತ್ತಿದೆ. ಕನಿಷ್ಠ ೨೪೦ ವೋಲ್ಟ್ಸ್ ಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವ ಬಲ್ಬ್‌ಗಳನ್ನು ಅಳವಡಿಸಬೇಕೆಂದು ಸೂಚನೆ ನೀಡಿದರು.
ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಉದ್ಯಾವರದಿಂದ ಬಲೈಪಾದೆವರೆಗಿನ ಸವೀಸ್ ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಳ್ಳುವುದರೊಂದಿಗೆ ಸರ್ವೀಸ್ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ಸಭೆಯ ಗಮನಕ್ಕೆ ತಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವು-ನೋವಿನ ಪ್ರಕರಣಗಳು ಉಂಟಾಗುತ್ತಿವೆ. ಮೇಲ್ಸೇತುವೆ ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತ ಪ್ರಕರಣಗಳನ್ನು ತಡೆಯಬಹುದು ಎಂದರು.
ರಾಷ್ಟ್ರೀಯ ಹೆದ್ದಾರಿ ಉಳಿಸಿ ಸಮಿತಿಯ ಸದಸ್ಯರುಗಳು ಬ್ರಹ್ಮಾವರ ನಗರ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ, ಫ್ಲೈ ಓವರ್, ವಿದ್ಯುತ್ ದೀಪಗಳ ಅಳವಡಿಕೆ, ರಸ್ತೆಯ ಮೀಡಿಯನ್ ಓಪನಿಂಗ್, ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳುವುದರೊಂದಿಗೆ ಅಪಘಾತಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಸಹಾಯಕ ಕಮೀಷನರ್ ರಶ್ಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಗುತ್ತಿಗೆದಾರರುಗಳು, ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!